ಸುಳ್ಯ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ


 ಮಂಗಳೂರು, ಜುಲೈ 26: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯನೊಬ್ಬನನ್ನು ದುಷ್ಕರ್ಮಿಗಳ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

 ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಎಂಬ ಯುವಕನನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಕೇರಳ ನೋಂದಣಿ ಸಂಖ್ಯೆ ಹೊಂದಿದ್ದ ಬೈಕ್‌ನಲ್ಲಿ ಬಂದಂತಹ ಅಪರಿಚಿತ ದುಷ್ಕರ್ಮಿಗಳು ಪ್ರವೀಣ್ ಮೇಲೆ ಮನಸೋ ಇಚ್ಛೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ್ದರು. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಪೆರುವಾಜೆ ಕ್ರಾಸ್‌ ಬಳಿ ಪ್ರವೀಣ್‌ ಅವರು ಕೋಳಿ ಅಂಗಡಿ ಹೊಂದಿದ್ದು, ರಾತ್ರಿ ಅಂಗಡಿ ಮುಚ್ಚುತ್ತಿರುವ ವೇಳೆ ಬೈಕ್‌ನಲ್ಲಿ ಬಂದಂತಹ ಮೂವರು ಮಾರಾಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಪ್ರವೀಣ್ ತಪ್ಪಿಸಿಕೊಳ್ಳಲು ಓಡಿದರಾದರೂ ಅಟ್ಟಾಡಿಸಿಕೊಂಡು ಹೋದ ದುಷ್ಕರ್ಮಿಗಳು ದಾಳಿ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬೆಳ್ಳಾರೆಯಲ್ಲಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ, ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.